ಬೆಂಗಳೂರು: ‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಹೋರಾಟ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ನಲ್ಲಿ ಈ ಯೋಜನೆಗೆ ₹ 1 ಸಾವಿರ ಕೋಟಿ ಮೀಸಲಿಟ್ಟಿದ್ದರು. ಆದರೆ, ಅದು ಕೇವಲ ಘೋಷಣೆಯಾಗಿಯೇ ಉಳಿದಿದೆ’ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಹೇಳಿದರು.
ಪಕ್ಷದ ಮತ್ತೊಬ್ಬ ವಕ್ತಾರಎಂ. ಲಕ್ಷ್ಮಣ್ ಜೊತೆ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಈ ವಿಚಾರವಾಗಿ ಪಕ್ಷ ಕಾನೂನಾತ್ಮಕವಾಗಿ ಮತ್ತು ಬೆಳಗಾವಿ ಅಧಿವೇಶನ ದಲ್ಲಿ ಹೋರಾಟ ಮಾಡಲಿದೆ’ ಎಂದರು.
‘ರಾಜ್ಯದ ಪಾಲಿಗೆ ಹಂಚಿಕೆಯಾದ ಕಾವೇರಿ ನೀರನ್ನು ನಾವು ಬಳಸಿಕೊಳ್ಳುವುದಕ್ಕೆ ಯಾವುದೇ ಅಡ ಚಣೆಯಿಲ್ಲ ಎಂದು ಸುಪ್ರೀಂ ಕೋರ್ಟ್ 2018ರಲ್ಲಿ ತೀರ್ಪು ನೀಡಿದೆ. ಆದರೂ ಈ ವಿಚಾರದಲ್ಲಿ ತಮಿಳುನಾಡು ಗೊಂದಲ ಸೃಷ್ಟಿಸುತ್ತಿದೆ. ಇದಕ್ಕೆ ಅಲ್ಲಿನ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಪ್ರಮುಖ ಕಾರಣ’ ಎಂದು ದೂರಿದರು.
‘ಮೇಕೆದಾಟು ಯೋಜನೆ ವಿರೋಧಿಸಿ ಇದೇ 21ರಂದು ತಮಿಳುನಾಡು, ಸುಪ್ರೀಂ ಕೋರ್ಟ್ನಲ್ಲಿ ಪ್ರಮಾಣಪತ್ರ ಸಲ್ಲಿಸಿದೆ. ಆದರೆ, ನಮ್ಮ ಸರ್ಕಾರ ನಿದ್ದೆ ಮಾಡುತ್ತಿದೆ’ ಎಂದರು.
‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರ ಅವರ ಕೈಯಲ್ಲಿದೆ. ಆದರೂ, ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯಲ್ಲಿ ಚರ್ಚೆ ಮಾಡಲು ಅವಕಾಶ ನೀಡುತ್ತಿಲ್ಲ’ ಎಂದೂ ಆರೋಪಿಸಿದರು.