ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್–ಎ–ತಯಬಾ(ಎಲ್ಇಟಿ) ಸಂಘಟನೆಗಳಿಗೆ ಸೇರಿದ ಎಂಟು ಉಗ್ರರು, ಭಾರತೀಯ ಸೇನೆಯ ಇಬ್ಬರು ಯೋಧರು ಹಾಗೂ ಇಬ್ಬರು ನಾಗರಿಕರು ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಮತ್ತು ಸೋಫಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಮೂರು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಯಿತು. ಸೋಫಿಯಾನ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ.
ದಕ್ಷಿಣ ಸೋಫಿಯಾನ್ನ ದ್ರಾಗದ್ ಮತ್ತು ಕಚ್ದೋರ ಪ್ರದೇಶದಲ್ಲಿ ಪ್ರತಿಭಟನಾ ನಿರತ ನಾಗರಿಕರು ಭದ್ರತಾ ಪಡೆ ನಡೆಸುತ್ತಿದ್ದ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾರೆ. ಇದೇ ವೇಳೆ ಹತ್ತಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
ಭಾರತೀಯ ಸೇನೆಯ ಲೆಫ್ಟಿನೆಂಟ್ ಉಮ್ಮರ್ ಫಯಾಜ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರು ಇದೇ ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾರೆ.
ಇಂದಿನ ಕಾರ್ಯಾಚರಣೆಯಲ್ಲಿ ಬಲಿಯಾದ ಎಲ್ಲ ಉಗ್ರರು ಸ್ಥಳೀಯರು ಎಂದು ಸೇನೆಯ ಅಧಿಕಾರಿ ಎಕೆ ಭಟ್ ಹೇಳಿದ್ದಾರೆ.