ಬೆಂಗಳೂರು: ಮೆಟ್ರೊ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಬಿಕಾಸ್ (37) ಅವರನ್ನು ಸೋಮವಾರ ರಾತ್ರಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪಶ್ಚಿಮ ಬಂಗಾಳದ ಬಿಕಾಸ್, ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಕಂಪನಿಯೊಂದರ ಅಡಿಯಲ್ಲಿ ಕಾರ್ಮಿಕರಾಗಿ ಮೆಟ್ರೊ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಠಾಣೆ ವ್ಯಾಪ್ತಿಯ ಎಂ.ಎಂ ರಸ್ತೆಯ ನಾಲಾ ಬಳಿ ಬಿಕಾಸ್ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಬಿಕಾಸ್ ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಳಿಗ್ಗೆ ಮೃತದೇಹ ನೋಡಿದ್ದ ಸ್ಥಳೀಯರು ಠಾಣೆಗೆ ದೂರು ನೀಡಿದ್ದರು’ ಎಂದೂ ತಿಳಿಸಿವೆ.