ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಗರದಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯು ಶನಿವಾರ ಮಧ್ಯರಾತ್ರಿ 12ಕ್ಕೆ ಅಂತ್ಯಗೊಂಡಿದೆ.
‘ಡಿ. 19ರ ಮಧ್ಯರಾತ್ರಿಯಿಂದ ಮೂರು ದಿನಗಳಿಂದ ನಗರದಲ್ಲಿದ್ದ ನಿಷೇಧಾಜ್ಞೆ ಕೊನೆಯಾಗಲಿದೆ. ಈ ಮೂರು ದಿನದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ’ ಎಂದು ನಗರ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.
’ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾರಾದರೂ ಪ್ರತಿಭಟನೆ ನಡೆಸಲು ಮುಂದಾದರೆ ಅವರಿಗೆ ಅನುಮತಿ ಕೊಡಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆಯಾ ಡಿಸಿಪಿಗಳೇ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಪರಿಸ್ಥಿತಿ ಕೈ ಮೀರುವ ಸಂದರ್ಭ ಬಂದರೆ ಪುನಃ ನಿಷೇಧಾಜ್ಞೆ ಜಾರಿ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದರು.