ಬೆಂಗಳೂರು: ‘ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಬಡವರಿಗೆ ಇನ್ನೊಂದು ತಿಂಗಳಲ್ಲಿ ಮನೆಗಳನ್ನು ಹಸ್ತಾಂತರಿಸಬೇಕು’ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್, ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಶೆಟ್ಟಿಹಳ್ಳಿ ವಾರ್ಡ್ನ ಕಮ್ಮಗೊಂಡನಹಳ್ಳಿಗೆ ಶನಿವಾರ ಭೇಟಿ ನೀಡಿದ್ದ ಅವರು ಅಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಪರಿಶೀಲಿಸಿದರು. ಫಲಾನುಭವಿಗಳ ಸಮಸ್ಯೆಗಳನ್ನೂ ಆಲಿಸಿದ ಅವರು ಆದಷ್ಟು ಬೇಗ ಪರಿಹಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜೊತೆಗೆ ಬಾಕಿ ಇರುವ ಮೊತ್ತವನ್ನು ಶೀಘ್ರವೇ ಬಿಡುಗಡೆಗೊಳಿಸುವಂತೆ ಅಧಿಕಾರಿಗಳಿಗೆತಾಕೀತು ಮಾಡಿದರು.
‘ಬಡವರಿಗಾಗಿ ನಿರ್ಮಾಣವಾಗುತ್ತಿರುವ ಈ ಮನೆಗಳು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ವಿಚಾರದಲ್ಲಿ ರಾಜಿ ಆಗುವಂತೆಯೇ ಇಲ್ಲ. ಒಂದೊಮ್ಮೆ ಲೋಪ ಆಗಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ’ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮುಖಂಡರಾದ ಕೆ.ಸಿ. ವೆಂಕಟೇಶ್, ಕೆಂಪಹೋಬಳಯ್ಯ, ರಮೇಶ್ ಹಾಗೂ ಅಧಿಕಾರಿಗಳು ಇದ್ದರು.