ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಚಿವರು ಗುಂಪಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಸಚಿವರಾದ ಬಿ. ಶ್ರೀರಾಮುಲು, ವಿ. ಸೋಮಣ್ಣ ಮತ್ತು ಕೆ. ಗೋಪಾಲಯ್ಯ ಕ್ಷೇತ್ರದ ವಿವಿಧೆಡೆ ಶನಿವಾರ ಪ್ರಚಾರ ನಡೆಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಬಿಜೆಪಿ ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಣ್ಣ ಸೇರಿದಂತೆ ಪಕ್ಷದ ಮುಖಂಡರ ಜತೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಜಾಲಹ
ಳ್ಳಿಯ ಹಲವೆಡೆ ಪ್ರಚಾರ ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನಗಳಲ್ಲಿ ಸಾಗಿದ ಅವರು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
‘ರಾಜರಾಜೇಶ್ವರಿನಗರ ಮತ್ತು ಶಿರಾ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಈ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುಖಭಂಗವಾಗಲಿದೆ’ ಎಂದು ಶ್ರೀರಾಮುಲು ಹೇಳಿದರು.
ಮುಖಂಡರ ಸಭೆ: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಲಕ್ಷ್ಮಿದೇವಿನಗರದ ಕೊಳೆಗೇರಿ ಪ್ರದೇಶದಲ್ಲಿ ಸ್ಥಳೀಯ ಮುಖಂಡರ ಸಭೆ ನಡೆಸಿದರು. ಬಳಿಕ ಅಲ್ಲಿ ಮನೆ ಮನೆಗೆ ತೆರಳಿ ಮುನಿರತ್ನ ಪರವಾಗಿ ಮತ ಯಾಚಿಸಿದರು.
ಮಾಜಿ ಉಪ ಮೇಯರ್ ಎಸ್. ಹರೀಶ್, ಪಾಲಿಕೆಯ ಮಾಜಿ ಸದಸ್ಯರಾದ ಸಿದ್ದೇಗೌಡ, ಸಾಯಿ ರೆಡ್ಡಿ ಸೇರಿದಂತೆ ಹಲವು ಮುಖಂಡರು ಸಚಿವರ ಜತೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ವಸತಿ ಸಚಿವ ಸೋಮಣ್ಣ ಪಕ್ಷದ ಸ್ಥಳೀಯ ಮುಖಂಡರ ಜತೆಗೂಡಿ ಸುಂಕದಕಟ್ಟೆ ಪ್ರದೇಶದಲ್ಲಿ ಮತ ಯಾಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.