ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯ ಉದಯನಗರ ಮುಖ್ಯರಸ್ತೆಯಲ್ಲಿ ಲೋಕೇಶ್ವರ್ ರಾವ್ (31) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಸ್ಥಳೀಯ ನಿವಾಸಿ ಲೋಕೇಶ್ವರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಬುಧವಾರ ಸಂಜೆ ಉದಯನಗರ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗಲೇ ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು’ ಎಂದು ಪೊಲೀಸರು ಹೇಳಿದರು.
‘ತೀವ್ರ ಗಾಯಗೊಂಡಿದ್ದ ಲೋಕೇಶ್ವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಲೋಕೇಶ್ವರ್ ಅವರ ಸಹೋದರ ದೂರು ನೀಡಿದ್ದಾರೆ’ ಎಂದರು.
‘ಹಳೇ ವೈಷಮ್ಯದಿಂದಾಗಿ ಈ ಕೊಲೆ ನಡೆದಿರುವ ಅನುಮಾನವಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಅವರು ಹೇಳಿದರು.