ಬೆಂಗಳೂರು: ‘ಕೇಂದ್ರ ಸರ್ಕಾರದ ಒಬಿಸಿ (ಇತರೆ ಹಿಂದುಳಿದ ವರ್ಗ) ಪಟ್ಟಿಗೆ ರಾಜ್ಯದಲ್ಲಿರುವ ಮುಸ್ಲಿಂ ಸಮುದಾಯದ 17 ಉಪಜಾತಿಗಳನ್ನೂ ಸೇರ್ಪಡೆ ಮಾಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತಂತೆ ನಗರದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಅರೀಫ್ ಜಮೀಲ್ ಸಲ್ಲಿಸಿರುವ ಅರ್ಜಿಯು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು.
ಪ್ರತಿವಾದಿಗಳ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಮಾತ್ರವೇ ಇದೆ. ಆದ್ದರಿಂದ ಕೇಂದ್ರ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ ಅವರ ಹೆಸರನ್ನೂ ಸೇರ್ಪಡೆ ಮಾಡಿ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.
ಆಕ್ಷೇಪಣೆ ಏನು?: ‘ರಾಜ್ಯ ಸರ್ಕಾರದ ಪ್ರವರ್ಗ 2 ಬಿ ಪಟ್ಟಿಯಲ್ಲಿ ಮುಸ್ಲಿಂ ಧರ್ಮದ 17 ಉಪಜಾತಿಗಳ ಹೆಸರುಗಳಿವೆ. ಆದರೆ, ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಈ ಎಲ್ಲ ಉಪಜಾತಿಗಳನ್ನು ಉಲ್ಲೇಖ ಮಾಡಿಲ್ಲ’ಎಂಬುದು ಅರ್ಜಿದಾರರ ಆಕ್ಷೇಪ.
‘ಇದರಿಂದ ಕೇಂದ್ರ ಸರ್ಕಾರದ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಹಾಗೂ ಕೇಂದ್ರ ಸರ್ಕಾರಿ ಇಲಾಖೆಯ ನೌಕರಿಗೆ ಅರ್ಜಿ ಸಲ್ಲಿಸುವಾಗ ಈ ಉಪಜಾತಿಗೆ ಸೇರಿದವರು ಮೀಸಲು ವಂಚಿತರಾಗುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಅರ್ಜಿದಾರರ ಪರ ರಹಮತ್ ಉಲ್ಲಾ ಕೊತ್ವಾಲ್ ವಕಾಲತ್ತು ವಹಿಸಿದ್ದಾರೆ.