ಬೆಂಗಳೂರು: ‘ಇದೇ 16ರಂದು ಅರಮನೆ ಮೈದಾನದಲ್ಲಿ ಪಕ್ಷದಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು.
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕಿ ಸೌಮ್ಯಾರೆಡ್ಡಿ, ರಾಣಿ ಸತೀಶ್ ಜೊತೆ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಮಹಿಳೆಯರು ಭಾಗವಹಿಸಲಿದ್ದಾರೆ’ ಎಂದರು.
‘ಮುಂದಿನ ವಿಧಾನಸಭಾ ಚುನಾ ವಣೆಯಲ್ಲಿ ಟಿಕೆಟ್ ಬಯಸಿ 109 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವಂತೆ ಪ್ರಿಯಾಂಕಾ ಗಾಂಧಿಗೆ ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ’ ಎಂದು ಹೇಳಿದರು.
ಪುಷ್ಪಾ ಅಮರನಾಥ್ ಮಾತನಾಡಿ, ‘ಮಹಿಳೆಯರಿಗೆ ರಾಜಕೀಯ ಮೀಸ ಲಾತಿ ಜಾರಿಗೆ ತರಬೇಕು. 74 ಕ್ಷೇತ್ರಗಳಲ್ಲಿ ಟಿಕೆಟ್ ಬಯಸಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. 30 ಕ್ಷೇತ್ರಗಳಲ್ಲಿ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದೇವೆ’ ಎಂದರು.
‘ಬಿಜೆಪಿ ಸರ್ಕಾರ ಇರುವ ಕಡೆ ಮಹಿಳೆಯರ ಮೇಲೆ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಬಿಜೆಪಿ ಸರ್ಕಾರ ಮಹಿಳಾ ವಿರೋಧಿ’ ಎಂದು ಸೌಮ್ಯರೆಡ್ಡಿ ವಾಗ್ದಾಳಿ ನಡೆಸಿದರು.