ಬೆಂಗಳೂರು: ನಗರದಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್ಎಲ್ಎಸ್ಐಯು) ಪ್ರವೇಶದ ವೇಳೆ ಶೇ 50ರಷ್ಟು ಮೀಸಲಾತಿಯನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂಬ ಎನ್ಎಲ್ಎಸ್ಐಯು (ತಿದ್ದುಪಡಿ) ಮಸೂದೆಯನ್ನು ಈ ವರ್ಷವೂ ಜಾರಿಗೆ ತಂದಿಲ್ಲ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ.
2019–20ನೇ ಸಾಲಿನ ಪ್ರವೇಶಾತಿ ಕೊನೆಗೊಂಡಿದೆ. ತರಗತಿಗಳೂ ಆರಂಭವಾಗಿವೆ.ಈ ವರ್ಷ 80 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ರಾಜ್ಯದ ವಿದ್ಯಾರ್ಥಿಗಳ ಸಂಖ್ಯೆ ಕೇವಲ 3. ಒಂದು ವೇಳೆ ತಿದ್ದುಪಡಿ ಮಸೂದೆ ಜಾರಿಗೆ ಬಂದಿದ್ದರೆ 40 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಸಿಗುತ್ತಿತ್ತು.
‘ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ಎಟಿ) ಮೂಲಕ ಪ್ರವೇಶ ನೀಡಲಾಗುತ್ತದೆ. ಎನ್ಎಲ್ಎಸ್ಐಯು ಮಸೂದೆಗೆ ತಿದ್ದುಪಡಿ ತಂದುದನ್ನು ಜಾರಿಗೊಳಿಸಿರುವ ಬಗ್ಗೆ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಹೀಗಾಗಿ ನಾವು ಇದುವರೆಗೆ ನಡೆಯುತ್ತ ಬಂದಂತೆ ಪ್ರವೇಶಾತಿ ನೀಡಿದ್ದೇವೆ’ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
2017ರಲ್ಲಿ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಪಡೆದು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲರು ಇದುವರೆಗೂ ಅದಕ್ಕೆ ಒಪ್ಪಿಗೆ ಸೂಚಿಸಿಲ್ಲ.