ಬೆಂಗಳೂರು: ನಗರದಲ್ಲಿ ಹೊಸದಾಗಿ ಸ್ಥಾಪಿಸಲಾದ ಬೆಳ್ಳಂದೂರು, ಮಹದೇವಪುರ, ಹೆಣ್ಣೂರು ಹಾಗೂ ತಲಘಟ್ಟಪುರ ಸಂಚಾರ ಠಾಣೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉದ್ಘಾಟಿಸಿದರು.
ಠಾಣೆಯ ಫಲಕ ಅನಾವರಣಗೊಳಿಸಿದ ಮುಖ್ಯಮಂತ್ರಿ, ‘ನಗರದಲ್ಲಿ ದಟ್ಟಣೆ ಸಮಸ್ಯೆ ಹೆಚ್ಚಿದೆ. ಸಾರ್ವಜನಿಕರ ಸಂಚಾರಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲು ಜವಾಬ್ದಾರಿಯಿಂದ ಕೆಲಸ ಮಾಡಿ’ ಎಂದು ಪೊಲೀಸರಿಗೆ ಕಿವಿಮಾತು ಹೇಳಿದರು. ಇನ್ಸ್ಪೆಕ್ಟರ್ ಕುರ್ಚಿಯಲ್ಲಿ ಕುಳಿತು, ತಮ್ಮ ಭೇಟಿಯ ಸಹಿ ದಾಖಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಹೆಚ್ಚಾಗಿರುವ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹೊಸ ತಂತ್ರಜ್ಞಾನ ಬಳಸಲಾಗುತ್ತಿದೆ’ ಎಂದರು.
‘ಅಪಘಾತ ಹಾಗೂ ಸಂಚಾರ ದಟ್ಟಣೆಯ ಬ್ಲ್ಯಾಕ್ ಸ್ಪಾಟ್ಗಳು ಹೆಚ್ಚಿರುವ ಕಡೆಗಳಲ್ಲಿ ಠಾಣೆ ಅಗತ್ಯವಿತ್ತು. ಹೀಗಾಗಿ, ನಾಲ್ಕು ಹೊಸ ಠಾಣೆಗಳನ್ನು ಸ್ಥಾಪಿಸಿ ಉದ್ಘಾಟಿಸಲಾಗಿದೆ. ಮುಂಬರುವ ಎರಡು ವರ್ಷಗಳಲ್ಲಿ ಹೊಸದಾಗಿ 6 ಸಂಚಾರ ಹಾಗೂ 9 ಕಾನೂನು ಸುವ್ಯವಸ್ಥೆ ಠಾಣೆ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕ ಅರವಿಂದ ಲಿಂಬಾವಳಿ, ಕಮಿಷನರ್ ಪ್ರತಾಪ್ ರೆಡ್ಡಿ, ವಿಶೇಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ, ಹೆಚ್ಚುವರಿ ಪೊಲೀಸ್ ಕಮಿಷನರ್ಗಳಾದ ಸಂದೀಪ್ ಪಾಟೀಲ, ಎಂ. ಚಂದ್ರಶೇಖರ್ ಹಾಗೂ ಜಂಟಿ ಕಮಿಷನರ್ (ಸಂಚಾರ) ಎಂ.ಎನ್. ಅನುಚೇತ್ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.