ಬೆಂಗಳೂರು: ನಗರದ ದಕ್ಷಿಣ ವಿಭಾಗದ ಡಿಸಿಪಿ ಆಗಿರುವ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಎಸ್ಪಿಯಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಆದೇಶ ಪತ್ರ ಕಳುಹಿಸಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಸಂಜೀವ್ಕುಮಾರ್, ‘ಮುಂದಿನ ಐದು ವರ್ಷಗಳ ಅವಧಿಗೆ ನಿಯೋಜನೆ ಆಧಾರದಲ್ಲಿ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ಎನ್ಐಎ ಎಸ್ಪಿಯಾಗಿ ನಿಯೋಜಿಸಲಾಗಿದೆ’ ಎಂದಿದ್ದಾರೆ.
‘ರಾಹುಲ್ಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು. ಅವರು ತುರ್ತಾಗಿ ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಬೇಕು’ ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಹಾರಾಷ್ಟ್ರದ ರಾಹುಲ್ಕುಮಾರ್, ಎಂಬಿಎ ಪದವೀಧರ. 2012ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು, ಬಂಟ್ವಾಳದ ಎಎಸ್ಪಿ ಆಗಿ ವೃತ್ತಿ ಆರಂಭಿಸಿದ್ದರು. ಹಾಸನ, ತುಮಕೂರು ಎಸ್ಪಿಯಾಗಿ ಕೆಲಸ ಮಾಡಿದ್ದರು. ಕೆಲ ತಿಂಗಳಿನಿಂದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.