ಬೆಂಗಳೂರು: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
‘17 ರಾಜ್ಯಗಳಲ್ಲಿ ಮಡಿವಾಳರು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದಾರೆ ಎಂಬ ಮಾಹಿತಿ ಪಡೆದಿದ್ದೇನೆ. ಚುನಾವಣೆ ಸಂದರ್ಭದಲ್ಲಿ ಇನ್ನೂ ಹಲವು ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಬೇಡಿಕೆ ಇಟ್ಟಿದ್ದಾರೆ. ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡುವುದಿಲ್ಲ, ಸಮಗ್ರವಾಗಿ ಪರಿಶೀಲಿಸುತ್ತೇನೆ’ ಎಂದರು.
ಮಡಿವಾಳರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ತೆರೆಯುವ ಬಗ್ಗೆಯೂ ಸರ್ಕಾರ ಸಕಾರಾತ್ಮಕ ಚಿಂತಿಸಿದೆ. ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಈ ಸಮಾಜಕ್ಕೆ ಟಿಕೆಟ್ ನೀಡಬೇಕು ಎಂಬ ಇಚ್ಛೆಯೂ ಇದೆ. ಆದರೆ, ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಸಭಿಕರು ‘ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರ’ ಎಂದು ಕೂಗಿದಾಗ. ‘ಅಲ್ಲಿ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎಂಬ ಮಾಹಿತಿ ಇದೆ. ನೀವು ಹೇಳಿದ್ದರಿಂದ ಮತ್ತೊಮ್ಮೆ ಸಮಿಕ್ಷೆ ನಡೆಸಿ ವಿವರ ಪಡೆದುಕೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.