ಬೆಂಗಳೂರು: ಡ್ರಗ್ಸ್ ವಿರುದ್ಧ ಅಬಕಾರಿ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಗಾಂಜಾ ಮಾರಾಟ ಆರೋಪದಡಿ ವಿಜಯೇಂದ್ರ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.
‘ಬನ್ನೇರುಘಟ್ಟದ ನಿವಾಸಿ ವಿಜಯೇಂದ್ರ, ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದ. ನಂತರ ಅವುಗಳನ್ನು ಕತ್ತರಿಸಿ ಒಣಗಿಸಿ ಮಾರಾಟ ಮಾಡುತ್ತಿದ್ದ’ ಎಂದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.
‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಬೆಂಗಳೂರು ನಗರ ಅಬಕಾರಿ ಪೊಲೀಸರು, ಆರೋಪಿಯನ್ನು ಬಂಧಿಸಿ ₹ 40 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಬೆಂಗಳೂರು ಹಾಗೂ ಇತರೆ ನಗರಗಳಲ್ಲಿ ಪರಿಚಿತ ಗ್ರಾಹಕರಿಗೆ ಆರೋಪಿ ಗಾಂಜಾ ಮಾರುತ್ತಿದ್ದ’ ಎಂದರು.
ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಲ್. ನಾಗೇಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮೋಹನ್ಕುಮಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.