ಬೆಂಗಳೂರು: ಹೊಸದಾಗಿ ಅಸ್ವಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಬಹುಸಂಖ್ಯಾತ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಬೆಂಗಳೂರು ಘಟಕ ಹಾಗೂ ಲಿಂಗಾಯತ ಪಂಚಮಸಾಲಿ ಯುವ ಘಟಕ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
‘ಬಿಜೆಪಿ ಎರಡು ಬಾರಿ ಅಧಿಕಾರಕ್ಕೆ ಬರಲು ಲಿಂಗಾಯತ ಪಂಚಮಸಾಲಿ ಸಮಾಜವೇ ಕಾರಣವಾಗಿತ್ತು. ಕಡಿಮೆ ಸಂಖ್ಯೆಯಲ್ಲಿದ್ದ ಲಿಂಗಾಯತ ಉಪ ಪಂಗಡಗಳಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮಾಜಕ್ಕೆ ಪ್ರಮುಖ ಸ್ಥಾನಮಾನ ನೀಡಿರಲಿಲ್ಲ. ಬಿಜೆಪಿ ಅನ್ಯಾಯ ಮಾಡಿತ್ತು. ಇದೇ ಕಾರಣಕ್ಕೆ ಈ ಭಾರಿ ಲಿಂಗಾಯತ ಪಂಚಮಸಾಲಿ ಸಮಾಜವು ಕಾಂಗ್ರೆಸ್ ಬೆಂಬಲಿಸಿದೆ. ಮೊದಲ ಸಂಪುಟದ ರಚನೆ ವೇಳೆ ನಮ್ಮ ಸಮಾಜಕ್ಕೆ ಆದ್ಯತೆ ನೀಡಿಲ್ಲ’ ಎಂದು ಮುಖಂಡರು ಆಕ್ರೋಶ ಹೊರಹಾಕಿದರು.
ಮುಂದಿನ ಸಂಪುಟದ ವಿಸ್ತರಣೆ ವೇಳೆ ಈ ಅನ್ಯಾಯವನ್ನು ಸರಿ ಪಡಿಸಬೇಕು. ಇಲ್ಲದಿದ್ದರೆ ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಧಾರವಾಡ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಸಮಾಜದ ಐದು ಮಂದಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.