ಪತ್ರಿಕಾ ವಿತರಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಅಸಂಘಟಿತ ವಲಯಕ್ಕೆ ಸೇರಿದ್ದಾರೆ. ಹಾಗಿದ್ದರೂ ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಸಾಮಾಜಿಕ ಭದ್ರತಾ ಮಂಡಳಿ ರಚನೆಯಾಗಿದೆ. ದಿನಪತ್ರಿಕೆ ವಿತರಿಸಲು ಬಹುತೇಕರು ದ್ವಿಚಕ್ರ ಅಥವಾ ಸೈಕಲ್ ಬಳಸುತ್ತಿದ್ದು, ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಇದೆ. ಹೀಗಾದಲ್ಲಿ, ವಿತರಕರು ಹಾಗೂ ಅವರ ಅವಲಂಬಿತರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಅವರಿಗೆ ನೆರವು ನೀಡಲು ಅಪಘಾತ ಪರಿಹಾರ ಸೌಲಭ್ಯ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಆದೇಶ ಹೇಳಿದೆ.