ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೊ ಸಮೇತ 'ಪೇಸಿಎಂ (paycm)' ಎಂಬುದಾಗಿ ಪೋಸ್ಟರ್ ಅಂಟಿಸಿದ್ದ ಆರೋಪದಡಿ ಕಾಂಗ್ರೆಸ್ನ ಇಬ್ಬರು ಕಾರ್ಯಕರ್ತರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ನಾಯ್ಡು ಹಾಗೂ ಗಗನ್ ಎಂಬುವರನ್ನು ವಶಕ್ಕೆ ಪಡೆದಿರುವುದಾಗಿ ಗೊತ್ತಾಗಿದೆ. ನಗರದ ಹಲವು ಪ್ರದೇಶಗಳ ಬಸ್ ತಂಗುದಾಣ ಹಾಗೂ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಲಾಗಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
'ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ಇತರೆ ಪುರಾವೆಗಳನ್ನು ಆಧರಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆದಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಕಾರ್ಯಕರ್ತರನ್ನು ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖಂಡರು, ಹೈಗ್ರೌಂಡ್ಸ್ ಠಾಣೆಗೆ ಬಂದಿದ್ದಾರೆ.