ವಿಚಾರಣೆ ವೇಳೆ ಮಂಡಳಿ ಪರ ವಕೀಲರು, ‘ರಾಜ್ಯ ಸರ್ಕಾರವು ಕನ್ನಡ ಭಾಷೆ ಕಲಿಕೆಯ ನಿಯಮಗಳು–2017 ಅನ್ನು ಪರಿಚಯಿಸಿದ್ದು, ಎಲ್ಲಾ ಶಾಲೆಗಳಲ್ಲಿ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಪಠ್ಯಕ್ರಮಗಳಲ್ಲಿ ಕನ್ನಡವನ್ನೂ ಒಂದು ವಿಷಯವಾಗಿ ಕಡ್ಡಾಯವಾಗಿ ಕಲಿಸಬೇಕು ಎಂಬ ಆದೇಶವಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಆದರೆ, ಈ ವಾದಾಂಶವನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ವಿದ್ಯಾರ್ಥಿಯು ಒಂದನೇ ತರಗತಿಯಿಂದ ಈವರೆಗೂ ಕನ್ನಡ ಭಾಷಾ ವಿಷಯವನ್ನು ಅಧ್ಯಯನ ಮಾಡಿಲ್ಲ. ಹಾಗಾಗಿ, ಕನ್ನಡ ಭಾಷಾ ವಿಷಯದಲ್ಲಿ ಪರೀಕ್ಷೆ ಬರೆಯಬೇಕು ಎಂದು ನಿರೀಕ್ಷಿಸುವುದು ಸರಿಯಲ್ಲ’ ಎಂದು ಹೇಳಿದೆ.