ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆ, ರ‍್ಯಾಲಿ ನಡೆಸಿದರೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಕಮಲ್ ಪಂತ್

ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಕೆ
Last Updated 27 ಸೆಪ್ಟೆಂಬರ್ 2020, 16:40 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಸೋಮವಾರ ‌ರ‍್ಯಾಲಿ ಹಾಗೂ ಪ್ರತಿಭಟನೆ ನಡೆಸಲು ಯಾರೊಬ್ಬರಿಗೂ ಅನುಮತಿ ನೀಡಿಲ್ಲ. ಯಾರಾದರೂ ರಸ್ತೆಗಿಳಿದು ಪ್ರತಿಭಟನೆ ಹಾಗೂ ರ‍್ಯಾಲಿ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂಥವರನ್ನು ಬಂಧಿಸಿ ಐಪಿಸಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಸಿದ್ದಾರೆ.

ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೋಮವಾರ ಕೈಗೊಳ್ಳಬೇಕಾದ ಭದ್ರತೆ ಬಗ್ಗೆ ವಿಶೇಷ ಸಭೆ ನಡೆಸಿ ಚರ್ಚಿಸಲಾಗಿದೆ. ನಿತ್ಯ ಕೆಲಸಕ್ಕೆ ಹೋಗುವವರು ಹಾಗೂ ವ್ಯಾಪಾರ ನಡೆಸುವವರು ಸೇರಿದಂತೆ ಯಾರೊಬ್ಬರಿಗೂ ತೊಂದರೆಯಾಗದಂತೆ ಭದ್ರತೆ ಕೈಗೊಳ್ಳಲು ಆಯಾ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

‘ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ನಗರ ಎಲ್ಲ ಕಡೆಯೂ ನಾಳೆ ಬಿಗಿ ಭದ್ರತೆ ಇರಲಿದೆ. ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿಸುವಂತಿಲ್ಲ. ಸಾರ್ವಜನಿಕರು ಹಾಗೂ ಅವರ ಆಸ್ತಿಗೆ ಧಕ್ಕೆ ತರುವಂತಿಲ್ಲ. ಪ್ರತಿಭಟನೆಗೆ ಕರೆ ನೀಡಿದ್ದಾರೆ ಎನ್ನಲಾದ ಕೆಲವರಿಂದ ಈಗಾಗಲೇ ಮುಚ್ಚಳಿಕೆ ಬರೆಸಿಕೊಳ್ಳಲಾಗಿದ್ದು, ಯಾವುದೇ ಅನಾಹುತ ಸಂಭವಿಸಿದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದೂ ಕಮಲ್ ಪಂತ್ ತಿಳಿಸಿದರು.

‘ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಹಮ್ಮಿಕೊಳ್ಳಲಾಗಿದೆ ಎನ್ನಲಾದ ರ‍್ಯಾಲಿಗೆ ಯಾರೂ ಅನುಮತಿ ಕೇಳಿಲ್ಲ. ಈ ಸ್ಥಳದಲ್ಲಿ ಯಾರಾದರೂ ರ‍್ಯಾಲಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಸೋಂಕು ತಡೆ ನಿಯಮಗಳು ಜಾರಿಯಲ್ಲಿದ್ದು, ಅವುಗಳು ಉಲ್ಲಂಘನೆಯಾದರೂ ಪ್ರಕರಣ ದಾಖಲಿಸಲಾಗುವುದು’ ಎಂದೂ ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT