ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಉಪ್ಪಾರಪೇಟೆ ಠಾಣೆಯ ಕಾನ್ಸ್ಟೆಬಲ್ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರ ವಿಚಾರಣೆಯಿಂದ ಕಾನ್ಸ್ಟೆಬಲ್ ಹೆಸರು ಹೊರಬಿದ್ದಿತ್ತು. ಹೆಚ್ಚಿನ ತನಿಖೆ ನಡೆಸಿದಾಗ ಕಾನ್ಸ್ಟೆಬಲ್ ಭಾಗಿಯಾಗಿರುವುದಕ್ಕೆ ಪುರಾವೆಗಳು ಸಿಕ್ಕಿದ್ದವು.
ಪ್ರಾಥಮಿಕ ಮಾಹಿತಿ ಅನ್ವಯ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ವರದಿ ನೀಡಿದ್ದರು. ಅದನ್ನು ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಅವರು ಕಾನ್ಸ್ಟೆಬಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
'ಮೊಬೈಲ್ ಆ್ಯಪ್ ಬಳಸಿಕೊಂಡು ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಆರೋಪಿಗಳ ಜೊತೆ ಕಾನ್ಸ್ಟೆಬಲ್ ಸಹ ಕೈ ಜೋಡಿಸಿದ್ದರು' ಎಂದು ಪೊಲೀಸ್ ಮೂಲಗಳು ಹೇಳಿವೆ.