ಬೆಂಗಳೂರು: ಸಿಗರೇಟ್ ಹಣ ಕೇಳಿದ್ದಕ್ಕೆ ಕಾದ ಎಣ್ಣೆ ಎರಚಿದ್ದ ರೌಡಿ ಸೈಯದ್ ಹನೀಫ್ ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಮರ ಜ್ಯೋತಿ ಲೇಔಟ್ ನಿವಾಸಿ ಮೇಘನಾ ಎಂಬುವರ ಮೈ ಮೇಲೆ ಕಾದ ಎಣ್ಣೆ ಎರಚಿ ಪರಾರಿಯಾಗಿದ್ದ. ಮಾರ್ಗಮಧ್ಯೆಯೂ ಶ್ರೀನಿವಾಸ್ ಎಂಬುವರ ಕಾರು ಅಡ್ಡಗಟ್ಟಿ ಬಿಯರ್ ಬಾಟಲಿಯಿಂದ ಹೊಡೆದು ಹೋಗಿದ್ದ.
ಶನಿವಾರ ತನ್ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಡ್ರ್ಯಾಗರ್ನಿಂದ ಹಲ್ಲೆ ಮಾಡಲು ಮುಂದಾಗಿದ್ದ. ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
ಹಲವು ಅಪರಾಧ ಕೃತ್ಯಗಳಲ್ಲಿ ಆರೋಪಿ ಭಾಗಿಯಾಗಿದ್ದ. ಡ್ರ್ಯಾಗರ್ ಹಾಗೂ ಇತರೆ ಆಯುಧಗಳನ್ನು ಜೊತೆಯಲ್ಲೇ ಇಟ್ಟುಕೊಂಡು ಓಡಾಡುತ್ತಿದ್ದ. ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡಿರುವ ಮಹಿಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.