ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಆಗುತ್ತಿದ್ದಂತೆ ಅಪರಾಧ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೂರ್ವ ವಿಭಾಗದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ರೌಡಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದರು.
ಹಲಸೂರು, ಬಾಣಸವಾಡಿ ಹಾಗೂ ಕಾಡುಗೊಂಡನಹಳ್ಳಿ ಉಪವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, 150 ರೌಡಿಗಳ ಮನೆಗೆ ಹೋಗಿ ಮಾಹಿತಿ ಪಡೆದುಕೊಂಡರು.
ರೌಡಿಗಳ ಸಂಚಾರ, ದಿನಚರಿ ಹಾಗೂ ಕುಟುಂಬಸ್ಥರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದರು. ಶ್ವಾನದಳಗಳ ಮೂಲಕ ಮನೆಗಳಲ್ಲಿ ತಪಾಸಣೆ ನಡೆಸಲಾಯಿತು. ರೌಡಿಗಳ ಸಹಿ ಪಡೆದುಕೊಂಡು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಾಕೀತು ಮಾಡಿದರು.
‘ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರ ಮನೆಗೂ ಹೋಗಿ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲೂ ಅವರ ಮೇಲೆ ನಿಗಾ ಇರಿಸಲಾಗುವುದು’ ಎಂದು ಪೂರ್ವ ವಿಭಾಗದ ಡಿಸಿಪಿ ಎಸ್.ಡಿ. ಶರಣಪ್ಪ ಹೇಳಿದರು.