ಬೆಂಗಳೂರು: ‘ಎಸ್ಸಿ, ಎಸ್ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನಿಗಮ, ಮಂಡಳಿಗಳಿಗೆ ಸರ್ಕಾರದಿಂದ ಶೀಘ್ರವಾಗಿಅನುದಾನ ಬಿಡುಗಡೆ ಮಾಡಬೇಕು’ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕರ ಕಲ್ಯಾಣ ಸಂಘಗಳ ಒಕ್ಕೂಟ ಆಗ್ರಹಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್.ರಾಜಾ,‘ಈ ಸಮುದಾಯಗಳಿಗೆ ಮೀಸಲಾಗಿರುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಪರದಾಡಬೇಕಾಗಿದೆ. ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಈವರೆಗೆ ಸೂಕ್ತ ಶಿಕ್ಷೆ ವಿಧಿಸಿಲ್ಲ ಮತ್ತು ಸಮಿತಿಗಳು ಸರಿಯಾಗಿ ರಚನೆಯಾಗಿಲ್ಲ. ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.
‘ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ಕೊಳಗೇರಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಮೇಸ್ತ್ರಿಗಳಿಗೆ ಸೇವಾ ಭದ್ರತೆ ಒದಗಿಸಬೇಕು.ಬಡವರಿಗೆ ಹೊರೆಯಾಗುವಂತೆ ಏರಿಸಿರುವ ದಿನಬಳಕೆ ವಸ್ತುಗಳು, ತೈಲ ಮತ್ತು ಆಹಾರ ಪದಾರ್ಥಗಳ ದರಗಳನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.