ಬೆಂಗಳೂರು: ನಗರದ ಕನಕಪುರ ರಸ್ತೆಯಲ್ಲಿರುವ ಅಂತರರಾಷ್ಟ್ರೀಯ ಖಾಸಗಿ ಶಾಲೆಯೊಂದು8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಉತ್ತೀರ್ಣ ಮಾಡುವಂತೆ ರಾಜ್ಯ ಸರ್ಕಾರವೇ ಆದೇಶ ನೀಡಿದೆ. ಈ ಆದೇಶವನ್ನು ಉಲ್ಲಂಘಿಸಿ ಶಾಲೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದೆ.
‘ಸೋಮವಾರ (ಜೂನ್ 8) ಗಣಿತ ಮತ್ತು ಮಂಗಳವಾರ ವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳೊಂದಿಗೆ ಒಬ್ಬರು ಪೋಷಕರು ಕಡ್ಡಾಯವಾಗಿ ಬರಬೇಕು ಎಂದು ಸೂಚಿಸಲಾಗಿದೆ’ ಎಂದು ಪೋಷಕರೊಬ್ಬರು ತಿಳಿಸಿದರು.
‘ಪರೀಕ್ಷೆ ಬರೆಯಲು ಹೋದಾಗ ಮಕ್ಕಳಿಗೆ ಸೋಂಕು ತಗುಲಿದರೆ ಗತಿ ಏನು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯವರ ಗಮನಕ್ಕೆ ತಂದರೂ, ನಾವು ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಮಕ್ಕಳನ್ನು ಕರೆದುಕೊಂಡು ಬನ್ನಿ ಎಂದು ಹೇಳುತ್ತಿದ್ದಾರೆ’ ಎಂದು ಅವರು ದೂರಿದರು.
‘9ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಹತ್ತನೇ ತರಗತಿಯ ಪಠ್ಯವನ್ನು ಆನ್ಲೈನ್ನಲ್ಲಿ ಬೋಧಿಸಲಾಗುತ್ತಿದೆ. ಆದರೂ ಈಗ ಪರೀಕ್ಷೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.