ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸಲು ಬಾಕಿ ಉಳಿಸಿಕೊಂಡ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ವಸೂಲಿ ಮಾಡಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.
ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಶುಕ್ರವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ವಲಯವಾರು ಮಾಹಿತಿ ಪಡೆದರು.
ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸಲು ಗಮನಹರಿಸಬೇಕು. ವಾರ್ಡ್ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ನೀಡಬೇಕು ಎಂದರು.
ಶಿಕ್ಷಣ ಸಂಸ್ಥೆಗಳು, ಕ್ಲಬ್ಗಳು, ಮಾಲ್ಗಳಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಂದಾಯ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.
ಬೆಸ್ಕಾಂ ದತ್ತಾಂಶದ ಆಧಾರ ಸ್ವತ್ತುಗಳನ್ನು ಪರಿಶೀಲಿಸಲಾಗುತ್ತಿದ್ದು, ಆಸ್ತಿತೆರಿಗೆಯಲ್ಲಿ ವ್ಯತ್ಯಾಸ ಕಂಡುಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ ವ್ಯತ್ಯಾಸದ ತೆರಿಗೆಯನ್ನು ದಂಡ ಹಾಗೂ ಬಡ್ಡಿಯೊಂದಿಗೆ ಸಂಗ್ರಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗದ ಸ್ವಾಧೀನಾನುಭವ ಪತ್ರ ಪಡೆದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ಸಂಗ್ರಹಿಸಬೇಕು ಎಂದರು.
ಎಲ್ಲ 8 ವಲಯಗಳ ಕಂದಾಯ ಅಧಿಕಾರಿ ಹಾಗೂ ಸಹಾಯ ಕಂದಾಯ ಅಧಿಕಾರಿಗಳಿಗೆ ವಾರದ ಗುರಿ ನೀಡಲಾಗಿದೆ. ಪ್ರತಿ ವಾರವೂ ಆಸ್ತಿ ತೆರಿಗೆ ಸಂಗ್ರಹಿಸಿರುವ ಬಗ್ಗೆ ಪರಿಶೀಲನಾ ಸಭೆ ನಡೆಸಬೇಕೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.
₹2,718 ಕೋಟಿ ಸಂಗ್ರಹ: 2022–23ನೇ ಸಾಲಿನಲ್ಲಿ ₹ 4,189.78 ಕೋಟಿ ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಡಿ.28ರವರೆಗೆ ₹2,718.22 ಕೋಟಿ ಕೋಟಿ ಸಂಗ್ರಹವಾಗಿದೆ. ಇನ್ನೂ ₹1,471.56 ಕೋಟಿ ಸಂಗ್ರಹಿಸಬೇಕಿದೆ ಎಂದರು.