ಬೆಂಗಳೂರು: ‘ಏಪ್ರಿಲ್ನಿಂದ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಮನೆ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಬಿಸಿಯೂಟ ನೌಕರರನ್ನು ಪೊಲೀಸರು ವಶಕ್ಕೆ ಪಡೆದು, ಕೆಲ ಗಂಟೆಗಳ ಬಳಿಕ ಬಿಡುಗಡೆಗೊಳಿಸಿದರು.
‘ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ’ದ ನೇತೃತ್ವದಲ್ಲಿ ಬಸವೇಶ್ವರನಗರದಲ್ಲಿರುವ ಸಚಿವರ ಮನೆ ಎದುರು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
‘ಕೊರೊನಾ ಸಂದರ್ಭದಲ್ಲಿ ಬಿಸಿಯೂಟ ನೌಕರರು ಸಂಕಷ್ಟದಲ್ಲಿದ್ದಾರೆ. ಅವರಿಗೆ ವೇತನ ಪಾವತಿಯಾಗಿಲ್ಲ. ಇದರಿಂದಾಗಿಕುಟುಂಬ ನಿರ್ವಹಣೆಯೂ ಕಷ್ಟವಾಗಿದೆ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.
‘ಕೆಲಸ ಕಾಯಂಗೊಳಿಸಬೇಕು. ಕನಿಷ್ಠ ವೇತನ ಹಾಗೂ ನಿವೃತ್ತಿ ವೇತನ ನೀಡಬೇಕು’ ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು, ‘ಮನೆ ಎದುರು ಪ್ರತಿಭಟನೆ ಅವಕಾಶವಿಲ್ಲ. ಬೇಕಾದರೆ ಸ್ವಾತಂತ್ರ್ಯ ಉದ್ಯಾನಕ್ಕೆ ಹೋಗಿ’ ಎಂದರು. ಅದಕ್ಕೆ ಒಪ್ಪದಿದ್ದಾಗ ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.