ಬೆಂಗಳೂರು: ‘ಶಾಲೆಯಲ್ಲಿ ನಾಟಕ ಮಾಡಿದ ಮಕ್ಕಳು, ಅವರ ಪೋಷಕರು ಹಾಗೂ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬೀದರ್ ಪೊಲೀಸರು ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ನಗರದ ಡಿಜಿ–ಐಜಿಪಿ ಕಚೇರಿ ಎದುರು ಹಲವು ಸಂಘಟನೆಗಳ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.
ನೃಪತುಂಗ ರಸ್ತೆಯಲ್ಲಿರುವ ಡಿಜಿ– ಐಜಿಪಿ ಪ್ರವೀಣ್ ಸೂದ್ ಕಚೇರಿಯ ಪ್ರವೇಶ ದ್ವಾರದಲ್ಲಿ ಸೇರಿದ್ದ ಪ್ರತಿಭಟನಕಾರರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
‘ಮಕ್ಕಳು, ಶಿಕ್ಷಕರು ಮತ್ತು ಪೋಷಕರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದಕ್ಕಾಗಿ ತಾಯಿ, ಶಿಕ್ಷಕಿಯನ್ನು ಬಂಧಿಸಿರುವ ಪೊಲೀಸರ ಕ್ರಮ ಖಂಡನೀಯ’ ಎಂದರು.
‘ಪೊಲೀಸ್ ಇಲಾಖೆ ಹೆಸರಿಗೆ ಕಳಂಕ ತಂದಿರುವ ಬೀದರ್ನ ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು‘ ಎಂದು ಅವರು ಒತ್ತಾಯಿಸಿದರು.