ಬೆಂಗಳೂರು: ‘ಯುವ ಕಾಂಗ್ರೆಸ್ ವತಿಯಿಂದ ದೇಶದಾದ್ಯಂತ ಉದ್ಯೋಗ ನೀಡಿಅಭಿಯಾನ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಕರ್ನಾಟಕದಿಂದ ಚಾಲನೆ ನೀಡುತ್ತಿದ್ದೇವೆ’ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.
‘ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ’ ಅಭಿಯಾನದ ಭಿತ್ತಿಪತ್ರವನ್ನು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ದೇಶದಲ್ಲಿ ಶೇ 65ರಷ್ಟು ಯುವಕರು ಉದ್ಯೋಗ ಇಲ್ಲದೆ ಬೀದಿಗಳಲ್ಲಿ ಅಡ್ಡಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಉದ್ಯೋಗ ನೀಡಲು ವಿಫಲವಾಗಿದೆ’ ಎಂದು ದೂರಿದರು.
‘ಮೋದಿ ಸರ್ಕಾರ ಆಡಳಿತಕ್ಕೆ ಬಂದು ಆರು ವರ್ಷ ಆಯಿತು. ಅವರು ನೀಡಿದ ಭರವಸೆಯಂತೆ 12 ಕೋಟಿ ಜನರಿಗೆ ಉದ್ಯೋಗ ಸಿಗಬೇಕಿತ್ತು. ಮೋದಿ ಸರ್ಕಾರ ಕೆಲಸ ಕೊಡುವ ಬದಲು ಇರುವ ಕೆಲಸವನ್ನು ಕಿತ್ತುಕೊಳ್ಳುತ್ತಿದೆ. ಕೆಲಸ ಇಲ್ಲದೆ ಸಾಕಷ್ಟು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದರು.
‘ಜಿಡಿಪಿ ಕುಸಿತ ಕಾಣಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರಣ’ ಎಂದ ಅವರು, ‘ಮುಂದಿನ ದಿನಗಳಲ್ಲಿ ಎಲ್ಲ ಸಚಿವರು ಮತ್ತು ಸಂಸದರ ಮನೆ ಎದುರು ಉದ್ಯೋಗ ಕೊಡಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತೇವೆ’ ಎಂದರು.
‘ಡ್ರಗ್ ದಂಧೆ ವಿರುದ್ಧವೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ನಡೆಸಲಿದ್ದಾರೆ’ ಎಂದರು.