ಬೆಂಗಳೂರು: ‘ಕಾಂಗ್ರೆಸ್ ಕಾರ್ಯಕರ್ತರು ಗನ್ ಇಟ್ಟುಕೊಳ್ಳುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ’ ಎಂದರು.
‘ಇದು ಕಾಂಗ್ರೆಸ್ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಯವರಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ನ ಗೂಂಡಾ ರಾಜ್ಯ’ ಎಂದೂ ಹರಿಹಾಯ್ದರು.
‘ಇದು ಅತಿ ದೊಡ್ಡ ಭದ್ರತಾ ವೈಫಲ್ಯ. ಮುಂದಿನ ದಿನಗಳಲ್ಲಿ ಯಾರಾದರೂ ಬಾಂಬ್ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ‘ ಎಂದು ತಿಳಿಸಿದರು.
ಗನ್ ಏಕೆ ವಶಕ್ಕೆ ಪಡೆದಿಲ್ಲ: ವಿಜಯೇಂದ್ರ
‘ಪೊಲೀಸರು ಈ ವ್ಯಕ್ತಿಯಿಂದ ಏಕೆ ಗನ್ ವಶಕ್ಕೆ ಪಡೆದುಕೊಂಡಿಲ್ಲ. ಈ ವ್ಯಕ್ತಿ ಯಾರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
‘ಈ ವ್ಯಕ್ತಿಯ ಹಿನ್ನೆಲೆಯ ಬಗ್ಗೆ ತನಿಖೆ ಆಗಬೇಕು. ಕಾಂಗ್ರೆಸ್ ಎಂಥವರನ್ನು ಕಟ್ಟಿಕೊಂಡು ಚುನಾವಣೆ ನಡೆಸಲು ಹೊರಟಿದೆ. ಎಂಬುದಕ್ಕೆ ಈ ಘಟನೆ ಸಾಕ್ಷಿ ಒದಗಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ವಿಧ್ವಂಸಕರ ಅಟ್ಟಹಾಸ ಮರುಕಳಿಸುತ್ತಲೇ ಇದೆ’ ಎಂದು ಹೇಳಿದ್ದಾರೆ.
‘ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಗಂಭೀರ ಕ್ರಮಕ್ಕೆ ಮುಂದಾಗಬೇಕಿದೆ. ಇದರ ಜತೆಗೆ ಸಮಾಜಘಾತುಕ ಶಕ್ತಿಗಳ ಚಟುವಟಿಕೆಯ ಮೇಲೆ ಹದ್ದಿನ ಕಣ್ಣಿಟ್ಟು, ಶಾಂತಿಯುತ ಮತದಾನಕ್ಕೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು’ ಎಂದೂ ಆಗ್ರಹಿಸಿದ್ದಾರೆ.