ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸರು, ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಂಗಳವಾರ ತಪಾಸಣೆ ನಡೆಸಿದರು.
ಸ್ಫೋಟದಿಂದ ಎಚ್ಚೆತ್ತುಕೊಂಡಿರುವ ಪೊಲೀಸರು, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ ನಿಲ್ದಾಣದಲ್ಲೂ ತಪಾಸಣೆ ನಡೆಯಿತು.
ರೈಲ್ವೆ ಎಸ್ಪಿ ಸೌಮ್ಯಲತಾ ನೇತೃತ್ವದಲ್ಲಿ ಸಿಬ್ಬಂದಿ ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. ಫ್ಲಾಟ್ಫಾರ್ಮ್, ರೈಲಿನ ಬೋಗಿಗಳು, ಪಾರ್ಸೆಲ್ ಇರಿಸುವ ಸ್ಥಳ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳ ಹಾಗೂ ಇತರೆ ಸ್ಥಳಗಳಲ್ಲಿ ಶೋಧ ನಡೆಸಿದರು. ಶ್ವಾನದಳದ ಸಿಬ್ಬಂದಿಯೂ ತಪಾಸಣೆಗೆ ಸಹಕಾರ ನೀಡಿತ್ತು.
‘ರೈಲು ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬರ ಮೇಲೂ ನಿಗಾ ವಹಿಸಬೇಕು. ಅನುಮಾನ ಕಂಡುಬಂದಲ್ಲಿ, ಅಂಥವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು’ ಎಂದು ಎಸ್ಪಿ ಸೌಮ್ಯಲತಾ ಸಿಬ್ಬಂದಿಗೆ ಸೂಚನೆ ನೀಡಿದರು.