ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ಒಂದು ತಿಂಗಳಿನಿಂದ ಪೊಲೀಸ್ ಇನ್ಸ್ಪೆಕ್ಟರ್ ಇಲ್ಲವಾಗಿದ್ದು ಕೂಡಲೇ ಆ ಹುದ್ದೆಗೆ ದಕ್ಷ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ರಾಜಾಜಿನಗರ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ಸರ್ಕಾರಕ್ಕೆ ಬರೆಯಲಾಗಿರುವ ಪತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ಅಕ್ಟೋಬರ್ 20 ರಂದು ರಾಜಾಜಿನಗರ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಆಗ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ತಲೆಮರೆಸಿಕೊಂಡಿದ್ದರು. ನಂತರ ನವೆಂಬರ್ 2 ರಂದು ಅವರನ್ನು ಅಮಾನತು ಮಾಡಲಾಗಿತ್ತು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನ ಪ್ರತಿಷ್ಠಿತ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಇಲ್ಲದಿರುವುದು ಸರಿಯಲ್ಲ. ಈ ಠಾಣೆ ಅನಾಥ ಸ್ಥಿತಿಯಿಂದ ಬಳಲುವುದೂ ಸರಿಯಲ್ಲ. ಕೂಡಲೇ ಸರ್ಕಾರ ಒಬ್ಬ ದಕ್ಷ ಹಾಗೂ ಸೂಕ್ತ ಇನ್ಸ್ಪೆಕ್ಟರ್ ಅನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.