ಯಲಹಂಕ: ‘ಗುಣಮಟ್ಟದ ಶಿಕ್ಷಣದ ಜೊತೆಗೆ ಇತರೆ ಚಟುವಟಿಕೆಗಳಿಗೂ ಒತ್ತು ನೀಡುವ ಮೂಲಕ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ, ಮಾನಸಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿ ರೂಪಿಸುವುದು ಮುಖ್ಯ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ 2019-20ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್ಎಸ್ಎಸ್ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
‘ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿ ಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅಗತ್ಯ ಪ್ರೋತ್ಸಾಹ ನೀಡುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು. ಆ ಮೂಲಕ ಸಮಾಜಕ್ಕೆ ಪ್ರತಿಭಾವಂತ ವ್ಯಕ್ತಿಗಳನ್ನು ಕೊಡುಗೆಯಾಗಿ ನೀಡಬೇಕು ಎಂದರು.
ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ‘ಕಾಲೇಜಿನಲ್ಲಿ 3,200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಟ್ಟಡ ನಿರ್ಮಾಣ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಬಿಎಂಪಿಯಿಂದ ₹5 ಕೋಟಿ ಹಾಗೂ ಸರ್ಕಾರದಿಂದ ₹3 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಮಾಹಿತಿ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ರಾಜೇಂದ್ರಪ್ರಸಾದ್, ಬಿಬಿಎಂಪಿ ಸದಸ್ಯರಾದ ಚಂದ್ರಮ್ಮ ಕೆಂಪೇಗೌಡ, ಎಂ. ಸತೀಶ್, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ಬಾಬು ಇದ್ದರು.