ಬೆಂಗಳೂರು: ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಅಗತ್ಯ ಸಾಮಗ್ರಿ ಪೂರೈಸಲು, ಅಗತ್ಯವಿರುವ ವೈದ್ಯಕೀಯ ಸಲಕರಣೆ ಖರೀದಿಗೆ ಹಾಗೂ ಸ್ವಚ್ಛತೆ ಕಾಪಾಡಲು ತುರ್ತಾಗಿ ಪ್ರತಿ ವಾರ್ಡ್ಗೆ ₹ 50 ಲಕ್ಷ ಅನುದಾನ ಬಿಡುಗಡೆ ಮಾಡಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಮೇಯರ್ ಎಂ.ಗೌತಮ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
‘ಪಾಲಿಕೆಯ 2020–21ನೇ ಸಾಲಿನ ಬಜೆಟ್ ಮಂಡನೆಯನ್ನು ಮುಂದೂಡಲಾಗಿದೆ. ಹಾಗಾಗಿ ತುರ್ತು ಪರಿಸ್ಥಿತಿ ನಿಭಾಯಿಸಲು ಹಾಗೂ ಪಾಲಿಕೆಯ ಆಡಳಿತ ಸುಗಮವಾಗಿ ಸಾಗುವಂತೆ ನೋಡಿಕೊಳ್ಳುವ ಉದ್ದೇಶದಿಂದ 2020–21ನೇ ಸಾಲಿನ ಆಯವ್ಯಯದ ಶೇ 10ರಷ್ಟು ಅನುದಾನವನ್ನು ಬಳಸಲು ಆಯುಕ್ತರಿಗೆ ಅಧಿಕಾರ ನೀಡಬೇಕು. ಪಾಲಿಕೆ ಕೌನ್ಸಿಲ್ ಸಭೆಯ ಹಾಗೂ ಸರ್ಕಾರದ ಅನುಮೋದನೆ ನಿರೀಕ್ಷಿಸಿ ಈ ಕುರಿತು ಆದೇಶ ಮಾಡಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.
ಇಂದು ವಿಡಿಯೊ ಕಾನ್ಫರೆನ್ಸ್
ಕಂದಾಯ ಸಚಿವ ಆರ್.ಅಶೋಕ ಹಾಗೂ ಮೇಯರ್ ಎಂ.ಗೌತಮ್ ಕುಮಾರ್ ಅವರು ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ ಇದೇ ಗುರುವಾರ ಬೆಳಿಗ್ಗೆ 10 ಗಂಟೆಗೆ ಪಾಲಿಕೆ ಸದಸ್ಯರ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಆಯಾ ವಾಡ್೯ ವ್ಯಾಪ್ತಿಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಇನ್ನು ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಮಂಜುನಾಥ ರಾಜು ಆಡಳಿತ ಪಕಷದ ನಾಯಕ ಕೆ.ಎ.ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಹಾಗೂ ಜೆಡಿಎಸ್ ಪಕ್ಷದ ನಾಯಕಿ ನೇತ್ರಾ ನಾರಾಯಣ್ ಭಾಗವಹಿಸಲಿದ್ದಾರೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.