ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ಪರಿಶೀಲಿಸಿ ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದು ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತೆ ಪಲ್ಲವಿ ಅವರನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ಮನವಿ ಮಾಡಿದೆ.
‘ಇತ್ತೀಚೆಗೆ ಶಿವಾಜಿನಗರದಲ್ಲಿನ ಶಾಲೆಯೊಂದು ಬೆಳಗಿನ ಜಾವದಲ್ಲಿ ಕುಸಿದು ಬಿದ್ದಿತ್ತು. ಅದೃಷ್ಟವಶಾತ್, ಕಟ್ಟಡ ಕುಸಿದ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಯಾರು ಇಲ್ಲದ ಕಾರಣ, ಯಾವುದೇ ಅವಘಡಗಳು ಸಂಭವಿಸಿಲ್ಲ. ಆದರೆ, ನಗರದಲ್ಲಿ ಇದೇ ರೀತಿಯ ಹಲವು ಶಾಲೆಗಳು ಕುಸಿದು ಬೀಳುವ ಹಂತದಲ್ಲಿವೆ. ಅಂತಹ ಶಾಲೆಗಳನ್ನು ಗುರುತಿಸಬೇಕು. ಎಲ್ಲ ಸರ್ಕಾರಿ, ಬಿಬಿಎಂಪಿ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತವಾದ ಭದ್ರತೆಯನ್ನು ಒದಗಿಸಬೇಕೆಂದು’ ಆರ್ಗನೈಸೇಷನ್ನ ಜಿಲ್ಲಾ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಒತ್ತಾಯಿಸಿದ್ದಾರೆ.