ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯಲ್ಲಿ ಕಂದಾಯ ನಿವೇಶನಗಳನ್ನು ನೋಂದಣಿ ಮಾಡಿದ ಆರೋಪದ ಮೇಲೆ ಐವರು ಉಪ ನೋಂದಣಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಬುಧವಾರ ಕಂದಾಯ ನಿವೇಶನಗಳ ನೋಂದಣಿಯಲ್ಲಿನ ಸಮಸ್ಯೆಗಳ ಕುರಿತು ಜೆಡಿಎಸ್ನ ಕಾಂತರಾಜ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಿವರಾಮ ಕಾರಂತ ಬಡಾವಣೆಯಲ್ಲಿ ಕಂದಾಯ ನಿವೇಶನಗಳ ನೋಂದಣಿ ಮಾಡಿದ ಅಧಿಕಾರಿಗಳನ್ನು ಪತ್ತೆಮಾಡಿ, ಅವರ ವಿರುದ್ಧ ಕ್ರಮ ಜರುಗಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಐವರು ಉಪ ನೋಂದಣಿ ಅಧಿಕಾರಿಗಳನ್ನು ಇತ್ತೀಚೆಗೆ ಅಮಾನತು ಮಾಡಿದ್ದು, ನ್ಯಾಯಾಲಯಕ್ಕೆ ಈ ಕುರಿತು ಪ್ರಮಾಣಪತ್ರವನ್ನೂ ಸಲ್ಲಿಸಲಾಗಿದೆ’ ಎಂದರು.
ಶಿವರಾಮ ಕಾರಂತ ಬಡಾವಣೆಗೆ 416 ಎಕರೆ ಜಮೀನು ಹಸ್ತಾಂತರ ಮಾಡುವಂತೆ ಕಂದಾಯ ಇಲಾಖೆಗೆ ನಿರ್ದೇಶನ ನೀಡಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆಗ, ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿತ್ತು. ಕಂದಾಯ ನಿವೇಶನಗಳ ನೋಂದಣಿ ಮತ್ತು ಅನಧಿಕೃತ ಬಡಾವಣೆಗಳ ಸಕ್ರಮದ ವಿಚಾರದಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಇದರಿಂದ ಸರ್ಕಾರಕ್ಕೆ ₹ 5,000 ಕೋಟಿಯಿಂದ ₹ 6,000 ಕೋಟಿಯಷ್ಟು ಆದಾಯ ಸಂಗ್ರಹವಾಗಲಿದೆ. ಆದರೆ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗ ಯಾವುದೇ ನಿರ್ಧಾರ ಮಾಡಲಾಗದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.