ಬೆಂಗಳೂರು: ನಗರದ ಬಸವೇಶ್ವರ ನಗರದಲ್ಲಿ ಭಾನುವಾರ ತಡರಾತ್ರಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಮೂವರು ಟೆಕಿಗಳು ಸ್ಥಳದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
ಅನಿಲ್, ಕಾರ್ತಿಕ್ ಹಾಗೂ ಶ್ರೀನಾಥ್ ಮೃತರು. ಮೂವರು ಒಂದೇ ಬೈಕ್ನಲ್ಲಿ ಹೊರಟಿದ್ದರು. ಕಾರ್ತಿಕ್ ಬೈಕ್ ಚಲಾಯಿಸುತ್ತಿದ್ದರು ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಿಳಿಸಿದರು.
‘ಬೈಕ್ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಮೂವರು ಹೆಲ್ಮೆಟ್ ಹಾಕಿರಲಿಲ್ಲ. ತಲೆಗೆ ಗಂಭೀರ ಪೆಟ್ಟು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದರು.