ಬೆಂಗಳೂರು: ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ ರೌಡಿ ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ್ನನ್ನು ಒಂದು ವರ್ಷದ ಅವಧಿಗೆ ನಗರದಿಂದ ಗಡಿಪಾರು ಮಾಡಲಾಗಿದೆ.
‘ಮಾಗಡಿ ರಸ್ತೆ ಠಾಣೆಯ ರೌಡಿಪಟ್ಟಿಯಲ್ಲಿ ನಾಗನ ಹೆಸರಿದೆ. 22 ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತ, ಜೈಲಿಗೂ ಹೋಗಿ ಬಂದಿದ್ದ. ಅಪರಾಧ ಕೃತ್ಯಗಳಿಗೆ ಪುನಃ ಸಂಚು ರೂಪಿಸುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಯಾದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು ನಾಗ್ನನ್ನು ಗಡಿಪಾರು ಮಾಡಿ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.
‘ಕೊಲೆ, ಸುಲಿಗೆ, ದರೋಡೆ, ಕೊಲೆ ಯತ್ನ, ಜೀವ ಬೆದರಿಕೆ, ವಾಹನ ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ನಾಗ್ ಭಾಗಿಯಾಗಿದ್ದ. ಏಳು ಕೊಲೆ ಪ್ರಕರಣಗಳಲ್ಲಿ ಈತನೇ ಪ್ರಮುಖ ಆರೋಪಿಯಾಗಿದ್ದ. ಯುವತಿಯೊಬ್ಬರು ತನ್ನನ್ನು ಪ್ರೀತಿಸಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಅವರ ತಂದೆಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ನಾಗ್ನನ್ನು ಸಿಸಿಬಿ ಪೊಲೀಸರೂ ಬಂಧಿಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಸಿದ್ದಾಪುರ, ರಾಜರಾಜೇಶ್ವರಿನಗರ, ಆಡುಗೋಡಿ, ಬನಶಂಕರಿ ಠಾಣೆಯಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚೆಗೆ ಈತ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ. ಬಿಜೆಪಿ ಮುಖಂಡರ ಜೊತೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದ. ವಿಧಾನಸಭಾ ಚುನಾವಣೆ ಆಕಾಂಕ್ಷಿ ಎಂಬುದಾಗಿ ಹೇಳಿಕೊಂಡು ಓಡಾಡುತ್ತಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.