ಬೆಂಗಳೂರು: ‘ಪಕ್ಷಕ್ಕೆ ದ್ರೋಹವೆಸಗಿ, ಮತದಾರರ ಬೆನ್ನಿಗೆ ಚೂರಿ ಹಾಕಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಆರ್. ನಗರ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.
ಕ್ಷೇತ್ರದ ವಿವಿಧ ಕಡೆಗಳಲ್ಲಿ ಮಂಗಳವಾರ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚಿಸಿದ ಸಿದ್ದರಾಮಯ್ಯ, ‘ಈ ಕ್ಷೇತ್ರಕ್ಕೆ ಕ್ರಿಮಿನಲ್ ಹಿನ್ನೆಲೆಯುಳ್ಳವರು ಶಾಸಕರಾಗಬೇಕೊ ಅಥವಾ ಶುದ್ಧ ಹಸ್ತದ ಸುಸಂಸ್ಕೃತ ಹೆಣ್ಣು ಮಗಳು ಶಾಸಕಿ ಆಗಬೇಕೊ ಎಂಬುದನ್ನು ಮತದಾರರೇ ನಿರ್ಧರಿಸಬೇಕು’ ಎಂದರು.
‘ನಾನು ಮುಖ್ಯಮಂತ್ರಿಯಾಗಿದ್ದಾಗ ಮುನಿರತ್ನ, ಎಂಟಿಬಿ ನಾಗರಾಜ್, ಬೈರತಿ ಬಸವರಾಜು ಹಾಗೂ ಎಸ್.ಟಿ. ಸೋಮಶೇಖರ್ ಅವರು ದಿನ ಬೆಳಗಾದರೆ ಮನೆಗೆ ಬರುತ್ತಿದ್ದರು. ಬೆಳಗ್ಗೆ ಏಳುವಾಗ ಸಂಜೆ ಮಲಗುವ ಮುನ್ನ ಅವರ ಮುಖ ನೋಡಬೇಕಿತ್ತು. ಈ ಎಲ್ಲರೂ ಯಾರಿಗೂ ಹೇಳದೇ ₹ 25 ಕೋಟಿಯಿಂದ ₹ 30 ಕೋಟಿ ಪಡೆದುಕೊಂಡು ಬಿಜೆಪಿಗೆ ಹೋದರು. ಕೊನೆಗೆ ಅಪವಾದವನ್ನು ನಾನು ಹೊತ್ತುಕೊಳ್ಳಬೇಕಾಯಿತು. ಇವರಿಂದಾಗಿ ನನಗೆ ಕೆಟ್ಟ ಹೆಸರು ಬಂತು’ ಎಂದು ಹೇಳಿದರು.
‘ಮುನಿರತ್ನ ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಟಿಕೆಟ್ ನೀಡಿ ಶಾಸಕರನ್ನಾಗಿ ಮಾಡಿತು. ಅವರು ಈ ರೀತಿ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆ ಎಂದು ಮೊದಲೇ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ. ಕ್ರಿಮಿನಲ್ ಚಟುವಟಿಕೆಗೆ ಮುನಿರತ್ನ ಹೆಸರುವಾಸಿ ಎಂದು ಹೇಳುತ್ತಾರೆ. ಈ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾ ಅವರಿಗೆ ಮತದಾರರು ಆಶೀರ್ವಾದ ಮಾಡಬೇಕು’ ಎಂದರು.
‘ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕ್ಷೇತ್ರಕ್ಕೆ ₹ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಮಂಜೂರಾಗಿದೆ. ಅನುದಾನ ಪಡೆದುಕೊಳ್ಳಲು ಮುನಿರತ್ನ, ಬೈರತಿ ಬಸವರಾಜು ಹಾಗೂ ಸೋಮಶೇಖರ್ ಅವರ ನಡುವೆ ಭಾರಿ ಪೈಪೋಟಿ ನಡೆಯುತ್ತಿತ್ತು. ಕ್ಷೇತ್ರದಲ್ಲಿ ಇಂದು ಏನಾದರೂ ಅಭಿವೃದ್ಧಿ ನಡೆದಿದ್ದರೆ ಅದು ನಮ್ಮ ಸರ್ಕಾರ ನೀಡಿದ ಅನುದಾನದಿಂದ. ನಾನೇನೂ ನನ್ನ ಮನೆಯಿಂದ ಹಣ ತಂದು ಕೊಟ್ಟಿರಲಿಲ್ಲ. ಈ ಕುರಿತು ನಾನು ಜೆಡಿಎಸ್ ಮತ್ತು ಬಿಜೆಪಿ ಜೊತೆಗೆ ಚರ್ಚೆಗೂ ಸಿದ್ಧ’ ಎಂದು ಸವಾಲು ಹಾಕಿದರು.
‘ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ನಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಇವತ್ತು ಬಡವರು ಎರಡು ಹೊತ್ತು ನೆಮ್ಮದಿಯಾಗಿ ಊಟ ಮಾಡುತ್ತಿದ್ದರೆ ಅನ್ನಭಾಗ್ಯ ಯೋಜನೆಯೇ ಕಾರಣ. ಇದಕ್ಕೆ ನಿಮ್ಮ ಎದುರಿಗೆ ಇರುವ ನ್ಯಾಯಬೆಲೆ ಅಂಗಡಿಯ ಮುಂದೆ ತೂಗು ಹಾಕಿರುವ ಫಲಕವೇ (ಅನ್ನಭಾಗ್ಯ) ಸಾಕ್ಷಿ’ ಎಂದು ಸಿದ್ದರಾಮಯ್ಯ ಹೇಳಿದರು.
‘ಅನ್ನಭಾಗ್ಯ ಯೋಜನೆಯಲ್ಲಿ ಏಳು ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಇದೀಗ ಯಡಿಯೂರಪ್ಪ ಅವರು ಅದನ್ನು ಐದು ಕೆಜಿಗೆ ಇಳಿಸಿದ್ದಾರೆ. ಅವರೇನು ಅವರ ಅಪ್ಪನ ಮನೆಯಿಂದ ಹಣ ತಂದು ಕೊಡುತ್ತಿದ್ದರೇ. ನಾನೂ ನಮ್ಮ ಅಪ್ಪನ ಮನೆಯಿಂದ ಯೋಜನೆಗೆ ಹಣ ಕೊಟ್ಟಿರಲಿಲ್ಲ. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಹತ್ತು ಕೆಜಿ ಅಕ್ಕಿ ನೀಡುತ್ತೇವೆ’ ಎಂದರು.
‘ಮುನಿರತ್ನ ಅವರು ವ್ಯಾಪಾರ ಕುದುರಿಸಿಕೊಂಡು ಬಿಜೆಪಿಗೆ ಹೋದವರು. ಒಬ್ಬೊಬ್ಬರಿಗೆ ₹ 25 ಕೋಟಿ ಕೊಟ್ಟು ಬಿಜೆಪಿಯವರು ನಮ್ಮ ಶಾಸಕರನ್ನು ಖರೀದಿ ಮಾಡಿದರು. ಇಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ. ಆ ಪಕ್ಷದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ’ ಎಂದು ತಿಳಿಸಿದರು.
‘ಕೊರೊನಾದಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸಿದರು. ಆದರೆ, ಬಿಜೆಪಿಗೆ ಕೊರೊನಾ ಹಬ್ಬವಾಗಿ ಪರಿಣಮಿಸಿತು. ಹೀಗಾಗಿಯೇ ವೈದ್ಯ ಉಪಕರಣಗಳ ಖರೀದಿ ಹೆಸರಲ್ಲಿ ಹಣ ಲೂಟಿ ಮಾಡಿದರು’ ಎಂದು ದೂರಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕರಾದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ನಸೀರ್ ಅಹಮದ್, ಬೈರತಿ ಬಸವರಾಜು, ನಾರಾಯಣಸ್ವಾಮಿ ಇದ್ದರು.
‘ಕೊರೊನಾದಿಂದ ಸೋಕಿನಿಂದ ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಅದಕ್ಕೆ ಯಾರು ಹೊಣೆ’ ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದರು.
ಸಿಪಿಐಎಂ ಮುಖಂಡ ಮಾರುತಿ ಮಾನ್ಪಡೆ ಅವರ ಸಾವಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂಬ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಸದಾನಂದಗೌಡರ ಹೇಳಿಕೆ ಬಾಲಿಶ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು. ಇದರಿಂದಾಗಿಯೇ ರೈತರು ಬೀದಿಗೆ ಇಳಿಯುವಂತಾಯಿತು. ಹೀಗಾಗಿ ಮಾನ್ಪಡೆಯವರ ಸಾವಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣ’ ಎಂದರು.
‘ಶಿರಾ ಕ್ಷೇತ್ರದಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದೆ. ಕೆ.ಆರ್. ಪೇಟೆ ಕ್ಷೇತ್ರದಲ್ಲಿಯೂ ಇದೇ ರೀತಿ ಹಣ ಹಂಚಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ, ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೇ ಆಶೀರ್ವಾದ ಮಾಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.