ಬೆಂಗಳೂರು: ಕನ್ನಡಿಗರ ಸರ್ವತೋಮುಖ ಬೆಳವಣಿಗೆ, ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಸಂಬಂಧಿಸಿದಂತೆ 16ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಹಂ.ಗು. ರಾಜೇಶ್ ಅವರು ನಿರ್ಣಯ ಮಂಡಿಸಿದರು. ಮೂರು ನಿರ್ಣಯಗಳನ್ನು ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
1. ಕನ್ನಡ, ಕನ್ನಡಿಗರ, ಕರ್ನಾಟಕದ ಸರ್ವತೋಮುಖ ಹಿತವನ್ನು ಕಾಯುವ ಚುನಾವಣಾ ಪ್ರಣಾಳಿಕೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಅಳವಡಿಸಿಕೊಳ್ಳಬೇಕು ಮತ್ತು ಅದನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು.
2. ಬೆಂಗಳೂರಿನಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಮತ್ತು ಬಿಬಿಎಂಪಿ ವಿಶೇಷ ಪ್ಯಾಕೇಜ್ಗಳನ್ನು ಘೋಷಿಸಬೇಕು.
3. ಶಾಲಾ ಹಂತಗಳಲ್ಲಿ ಯಾವುದೇ ಬಗೆಯ ಪಠ್ಯಕ್ರಮಗಳನ್ನು ಅಳವಡಿಸಿಕೊಂಡು ಬೋಧಿಸುವ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ವಿಷಯವಾಗಿ ಬೋಧಿಸಬೇಕೆಂಬ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ನೀತಿಯನ್ನು ಪಾಲಿಸದ ಶಾಲೆಗಳ ಮೇಲೆ ಸರ್ಕಾರ ಶಿಸ್ತುಕ್ರಮ ಜರುಗಿಸಬೇಕು.