ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ (51) ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಸಂತ್ರಸ್ತೆಯಿಂದ ಸಿಐಡಿ ಅಧಿಕಾರಿಗಳು ಶನಿವಾರ ಮಾಹಿತಿ ಪಡೆದುಕೊಂಡರು.
ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಮಾಹಿತಿಗಳನ್ನು ನೀಡುವಂತೆ ಕೋರಿ ಸಿಐಡಿ ಅಧಿಕಾರಿಗಳು ಸಂತ್ರಸ್ತೆಗೆ ಪತ್ರ ಬರೆದಿದ್ದರು. ಅದರಂತೆ ನಗರದ ಸಿಐಡಿ ಕಚೇರಿಗೆ ಶನಿವಾರ ಬಂದಿದ್ದ ಸಂತ್ರಸ್ತೆ, ಕೃತ್ಯಕ್ಕೆ ಸಂಬಂಧಪಟ್ಟಂತೆ ಪುನಃ ಹೇಳಿಕೆ ನೀಡಿದ್ದಾರೆ.
‘ಪ್ರಕರಣದ ತನಿಖೆಗೆ ಸಂತ್ರಸ್ತೆ ಹೇಳಿಕೆ ಅಗತ್ಯವಿತ್ತು. ಹೀಗಾಗಿ, ಅವರಿಂದ ಹೇಳಿಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.