ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅಭಿವೃದ್ಧಿಪಡಿಸಲಿರುವ ಡಾ. ಶಿವರಾಮ ಕಾರಂತ ಬಡಾವಣೆಯ ವ್ಯಾಪ್ತಿಯಲ್ಲಿ 2018ಕ್ಕಿಂತ ಮುಂಚೆ ಕಟ್ಟಡ ನಿರ್ಮಿಸಿರುವ ಸ್ವತ್ತುಗಳ ಮಾಲೀಕರಿಗೆ ಸಕ್ರಮ ಪ್ರಮಾಣಪತ್ರವನ್ನು ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಇದೇ 13ರಿಂದ ವಿತರಿಸಲಾಗುತ್ತದೆ.
ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು 2018 ಕ್ಕಿಂತ ಮುಂಚೆ ಕಟ್ಟಡ ಕಟ್ಟಿದವರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ವರದಿಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ 2,500 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶ ಹೊರಡಿಸಿದೆ.
ಫಲಾನುಭವಿಗಳು ಸಕ್ರಮ ಪ್ರಮಾಣಪತ್ರವನ್ನು ಪಡೆಯಲು ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು.
ಫಲಾನುಭವಿಗಳು ಪ್ರಮಾಣಪತ್ರ ಸ್ವೀಕರಿಸಲು ಯಾವ ದಿನ ಯಾವ ಸಮಯಕ್ಕೆ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಗೆ ಬರಬೇಕು ಎಂಬ ಬಗ್ಗೆ ಅವರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಕಳುಹಿಸಲಾಗುವುದು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.