ಬೆಂಗಳೂರು: ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಯ ಕಾಲಿಗೆ ಗುಂಡು ಹಾರಿಸಿ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಮುನಿಕೃಷ್ಣ ಅಲಿಯಾಸ್ ಕಪ್ಪೆ (27) ಬಂಧಿತ ರೌಡಿಶೀಟರ್. ಈತನ ವಿರುದ್ಧ ಅಮೃತಹಳ್ಳಿ, ಕೊಡಿಗೇಹಳ್ಳಿ, ಜ್ಞಾನ ಭಾರತಿ, ಚಿಕ್ಕಜಾಲ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ ಸೇರಿ ಎಂಟಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಮದ್ಯ ಕೊಡಲಿಲ್ಲವೆಂಬ ಕಾರಣಕ್ಕೆ ಯಶವಂತ ಎಂಬಾತನ ಮೇಲೆ ಹಲ್ಲೆ ನಡೆಸಿ ಮುನಿಕೃಷ್ಣ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬುಧವಾರ ನಸುಕಿನ 5.15ರ ಸುಮಾರಿಗೆ ಮುನಿಕೃಷ್ಣ ಮತ್ತು ಆತನ ಸಹಚರ ಬಾಗಲೂರು ಠಾಣಾ ವ್ಯಾಪ್ತಿಯ ಮಿಟಗಾನಹಳ್ಳಿ ಕ್ವಾರೆ ಸಮೀಪವಿರುವ ಪಾಳು ಮನೆಯಲ್ಲಿದ್ದಾರೆಂಬ ಮಾಹಿತಿ ಪಡೆದು ಬಂಧಿಸಲು ಪೊಲೀಸರು ಅಲ್ಲಿಗೆ ತೆರಳಿದ್ದರು.
ಪೊಲೀಸರನ್ನು ಕಂಡ ತಕ್ಷಣ ಮುನಿಕೃಷ್ಣನ ಸಹಚರ ಪರಾರಿಯಾಗಿದ್ದಾನೆ. ಮುನಿಕೃಷ್ಣನನ್ನು ಬಂಧಿಸಲು ಮುಂದಾಗುತ್ತಿದ್ದಂತೆ, ಹೆಡ್ ಕಾನ್ಸ್ಟೆಬಲ್ ನಂದೀಶ್ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ.ಆಗ ಇನ್ಸ್ಪೆಕ್ಟರ್ ಅರುಣ್ಕುಮಾರ್ ಬಲ ಕಾಲಿಗೆ ಗುಂಡು ಹೊಡೆದಿದ್ದಾರೆ. ಕುಸಿದು ಬಿದ್ದ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.