ಬೆಂಗಳೂರು: ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ಕ್ಯಾಂಪಸ್ ನಿರ್ಮಾಣಕ್ಕೆ ಇರುವ ಎಲ್ಲ ತೊಡಕುಗಳನ್ನು ನಿವಾರಿಸಿ ಶೀಘ್ರದಲ್ಲಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣಕ್ಕೆ ಇರುವ ತೊಡಕುಗಳ ನಿವಾರಣೆ ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಎಚ್.ಡಿ. ರೇವಣ್ಣ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.
‘ರಾಮನಗರದಲ್ಲಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣಕ್ಕೆ 2007ರಲ್ಲೇ ತೀರ್ಮಾನ ಕೈಗೊಳ್ಳ ಲಾಗಿತ್ತು. ಈವರೆಗೂ ಅದು ಅನುಷ್ಠಾನಕ್ಕೆ ಬಂದಿಲ್ಲ. ಜಮೀನುಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿರುವುದು ಸೇರಿದಂತೆ ಹಲವು ತೊಡಕುಗಳಿವೆ. ಅವುಗಳನ್ನೆಲ್ಲ ನಿವಾರಿಸಿ ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.
ಕೋರಿಕೆಯಂತೆ ಸಭೆ: ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಸಭೆಗೆ ಆಹ್ವಾನಿಸದೇ ಇರುವ ಕುರಿತ ಪ್ರಶ್ನೆಗೆ ‘ಇದು ಸರ್ಕಾರ ನಿಗದಿ ಮಾಡಿದ ಸಭೆಯಲ್ಲ. ಸ್ಥಳೀಯ ಶಾಸಕರೂ ಆಗಿರುವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದರು. ಈ ಕಾರಣದಿಂದ ತುರ್ತಾಗಿ ಸಭೆ ನಡೆಸಲಾಗಿದೆ’ ಎಂದರು.