ಬೆಂಗಳೂರು: ಅರ್ಕಾವತಿ ಬಡಾವಣೆಯಲ್ಲಿ ನಿವೇಶನಕ್ಕಾಗಿ ಹಣ ಪಾವತಿ ಮಾಡಿರುವವರಿಗೆ ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.
ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾಗಿದ್ದರೂ ಇನ್ನೂ ಅದನ್ನು ಒದಗಿಸದ ಬಗ್ಗೆ ಫಲಾನುಭವಿಗಳು ಬಿಡಿಎ ಅಧ್ಯಕ್ಷರನ್ನು ಬುಧವಾರ ಭೇಟಿ ನೀಡಿ ಅಳಲು ತೋಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ‘ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ. ಪ್ರತಿಯೊಂದು ಬಡಾವಣೆಯ ಸ್ಥಿತಿಗತಿ ಬಗ್ಗೆ ಪ್ರತ್ಯೇಕವಾಗಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡುತ್ತಿದ್ದೇನೆ. ಎಲ್ಲ ಬಡಾವಣೆಗಳ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ’ ಎಂದರು.
‘ಸಮಸ್ಯೆಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಜನಸ್ನೇಹಿ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಬೇಕು. ಪ್ರಮುಖವಾಗಿ ಅರ್ಕಾವತಿ ಬಡಾವಣೆಯ ಸಮಸ್ಯೆ ಮತ್ತು ಇನ್ನಿತರೆ ಅಡೆತಡೆಗಳ ಬಗ್ಗೆ ಆಯುಕ್ತರೊಂದಿಗೆ ಚರ್ಚಿಸಿ ಹಣ ಪಾವತಿ ಮಾಡಿರುವ ಎಲ್ಲರಿಗೂ ನ್ಯಾಯ ಒದಗಿಸಿಕೊಡುತ್ತೇನೆ’ ಎಂದು ಭರವಸೆ ನೀಡಿದರು.
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕಾರ್ಯವನ್ನೂ ಆದಷ್ಟೂ ಶೀಘ್ರದಲ್ಲಿ ಆರಂಭಿಸಲಾಗುತ್ತದೆ ಎಂದೂ ಅವರು ತಿಳಿಸಿದರು.