ಬೆಂಗಳೂರು: ಸ್ಮಾರ್ಟ್ಸಿಟಿ ಯೋಜನೆಯಡಿಕಬ್ಬನ್ ಉದ್ಯಾನದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳನ್ನು ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸಬೇಕು ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಅಧ್ಯಕ್ಷ ರಾಕೇಶ್ ಸಿಂಗ್ ಗಡುವು ವಿಧಿಸಿದರು.
ಬೆಂಗಳೂರು ಸ್ಮಾರ್ಟ್ಸಿಟಿ ಸಂಸ್ಥೆಯು ಕಬ್ಬನ್ ಉದ್ಯಾನದ ಅಭಿವೃದ್ಧಿಗಾಗಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಅವರು ಬುಧವಾರ ಪರಿಶೀಲಿಸಿದರು.
ಉದ್ಯಾನದಲ್ಲಿರುವ ಬಾಲಭವನ ಆವರಣದಲ್ಲೂ ಸ್ಮಾರ್ಟ್ಸಿಟಿ ಯೋಜನೆಯಡಿ ಬೋಟಿಂಗ್ ಕೊಳ, ಇಲ್ಲಿನ ಬಯಲು ರಂಗಮಂದಿರದ ಪುನರ್ನಿರ್ಮಾಣ, ವಿಜ್ಞಾನ ಪಾರ್ಕ್ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.
‘ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಯೋಜನೆ ರೂಪಿಸಿ ಹಾಗೂ ವೈಜ್ಞಾನಿಕ ಅಂಶಗಳನ್ನು ಅಳವಡಿಸಿಕೊಂಡು ಕಾಮಗಾರಿಗಳನ್ನು ನಡೆಸಬೇಕು’ ಎಂದು ಗುತ್ತಿಗೆದಾರರಿಗೆ ರಾಕೇಶ್ ಸಿಂಗ್ ಸೂಚಿಸಿದರು.
ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್, ಸ್ಮಾರ್ಟ್ಸಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್, ಮುಖ್ಯ ಎಂಜಿನಿಯರ್ ವಿನಾಯಕ ಸುಗೂರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಾಲಕೃಷ್ಣ ಹಾಗೂ ಸಿಬ್ಬಂದಿ ಇದ್ದರು.