ಬೆಂಗಳೂರು: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿ ಗೌರವ್ ಗುಪ್ತ ಗುರುವಾರ ಪರಿಶೀಲನೆ ನಡೆಸಿದರು.
‘ನಗರದ ಕೇಂದ್ರಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿಯ ರಾಜಭವನ ರಸ್ತೆ ಸೇರಿದಂತೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಂಡರ್ ಶ್ಯೂರ್ ಮಾದರಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಅದಕ್ಕೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೇಸ್ ಕೋರ್ಸ್ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ನೆಹರೂ ತಾರಾಲಯ ರಸ್ತೆ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಇನ್ನಿತರೆ ರಸ್ತೆಗಳನ್ನು ವೀಕ್ಷಿಸಿದರು. ‘ಈ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.
ಚರಂಡಿ, ಪಾದಚಾರಿ ಮಾರ್ಗ ದುರಸ್ತಿ, ವಿನ್ಯಾಸ, ಸಿಬ್ಬಂದಿ ಕೊರತೆಯಿಂದಾಗಿ ಕಾಮಗಾರಿ ನಿಧಾನವಾಗಿದೆ ಎಂದು ಎಂಜಿನಿಯರ್ಗಳು ಉತ್ತರಿಸಿದರು.
‘ನಗರದ ನಾಗರಿಕರು ಹಾಗೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಎಂಜಿನಿಯರ್ಗಳು ಸ್ಥಳದಲ್ಲಿದ್ದು ಕಾಮಗಾರಿಯ ಮೇಲ್ವಿಚಾರಣೆ ಮಾಡಬೇಕು’ ಎಂದು ಗೌರವ್ ಗುಪ್ತ ನಿರ್ದೇಶನ ನೀಡಿದರು.
ಪಾಲಿಕೆಯ ವಿಶೇಷ ಆಯುಕ್ತ (ಯೋಜನೆ) ಮನೋಜ್ ಜೈನ್, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಪೂರ್ವ ವಲಯ ಮುಖ್ಯ ಎಂಜಿನಿಯರ್ ಪ್ರಭಾಕರ್, ಮುಖ್ಯ ಎಂಜಿನಿಯರ್ (ಸ್ಮಾರ್ಟ್ ಸಿಟಿ) ಶ್ರೀನಿವಾಸ್ ಇದ್ದರು.