ಬೆಂಗಳೂರು: ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಸಿಗರೇಟ್ ಸೇದಿದ್ದ ಆರೋಪದಡಿ ಮೊಹಮ್ಮದ್ ಅಸ್ಲಾಂ ಎಂಬುವವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಆರೋಪಿ ಅಸ್ಲಾಂ, ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಇತ್ತೀಚೆಗೆ ಪ್ರಯಾಣಿಸುತ್ತಿದ್ದ. ವಿಮಾನದ ಶೌಚಾಲಯಕ್ಕೆ ಹೋಗಿ ಸಿಗರೇಟ್ ಸೇದುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಹೊಗೆ ನೋಡಿದ್ದ ಸಿಬ್ಬಂದಿ, ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿದ್ದ ಸಿಬ್ಬಂದಿ ಠಾಣೆಗೆ ಒಪ್ಪಿಸಿದ್ದಾರೆ. ದೂರು ಸಹ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.