ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ನಾಮಪತ್ರ ಸಲ್ಲಿಸಿದರು.
ತಮ್ಮ ಪಕ್ಷದ ನಾಯಕರ ಜೊತೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ಇಬ್ಬರೂ ಉಮೇದುವಾರಿಕೆ ಸಲ್ಲಿಸಿದರು.
ರಮೇಶ ಬಾಬು ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕರಾದ ಜಿ. ಪರಮೇಶ್ವರ, ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಇದ್ದರು.
‘ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ’ ಎಂಬ ಕುಮಾರಸ್ವಾಮಿ ಆರೋಪಕ್ಕೆ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬಿಜೆಪಿ ಹಾಗೂ ಜೆಡಿಎಸ್ ಚಟುವಟಿಕೆ ನಮಗೆ ಬೇಕಾಗಿಲ್ಲ. ಸಿದ್ದರಾಮಯ್ಯ ನಮ್ಮ ಶಾಸಕಾಂಗ ಪಕ್ಷದ ನಾಯಕರು. ಅವರು ಯಾಕೆ ರಾಜೇಶ್ ಗೌಡರನ್ನು ಬಿಜೆಪಿಗೆ ಕಳುಹಿಸಿ ಕೊಡುತ್ತಾರೆ. ಶಿರಾದ ನಮ್ಮ ಅಭ್ಯರ್ಥಿ ಅತ್ಯಂತ ತಿಳಿವಳಿಕೆ ಹೊಂದಿರುವವರು. ಅಲ್ಲಿನ ಜನರು ದಡ್ಡರೇನೂ ಅಲ್ಲ. ಸೂಕ್ತಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ’ ಎಂದರು.
ಚೌಡರೆಡ್ಡಿ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ನ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಪಕ್ಷದ ನಾಯಕರಾದ ಬಸವರಾಜ ಹೊರಟ್ಟಿ, ಗೋವಿಂದರಾಜು ಇದ್ದರು.