ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿತ್ತನೆ ಬೀಜ | ಇತರ ರಾಜ್ಯಗಳಿಗಿಂತ ಕಡಿಮೆ ದರ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 28 ಮೇ 2024, 16:29 IST
Last Updated 29 ಮೇ 2024, 3:15 IST
ಅಕ್ಷರ ಗಾತ್ರ

ಬೆಂಗಳೂರು: ‘ಬರಗಾಲದಿಂದ ರಾಜ್ಯದಲ್ಲಿ ಬಿತ್ತನೆ ಬೀಜಗಳ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಆದರೂ, ಇತರ ರಾಜ್ಯಗಳಿಗೆ ಹೋಲಿಸಿದರೆ ಬಿತ್ತನೆ ಬೀಜಗಳ ದರ ಕರ್ನಾಟಕದಲ್ಲಿ ಕಡಿಮೆಯೇ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿತ್ತನೆ ಬೀಜಗಳ ದರ ಏರಿಕೆ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಮಂಗಳವಾರ ಪ್ರತಿಕ್ರಿಯಿಸಿರುವ ಅವರು, ‘ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜಗಳ ದರ ಏರಿಕೆಯಾಗಿದೆ. ಇದರಿಂದಾಗಿ ಮಾರಾಟ ದರವೂ ಹೆಚ್ಚಾಗಿದೆ’ ಎಂದಿದ್ದಾರೆ.

ಬಿತ್ತನೆ ಬೀಜಗಳ ಖರೀದಿ ದರಗಳು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಗರಿಷ್ಠ ಮಾರಾಟ ದರಗಳ ಆಧಾರದಲ್ಲಿ ಬಿತ್ತನೆ ಬೀಜದ ಮಾರಾಟ ದರ ನಿಗದಿಪಡಿಸಲಾಗುತ್ತದೆ. 2022–23ನೇ ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷ ಖರೀದಿ ದರ ಶೇಕಡ 59.58 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ದರವು ಶೇ 48.5, ಉದ್ದು ಬೆಳೆಯ ದರವು ಶೇ 37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ 28.29 ರಿಂದ 37.69 ರಷ್ಟು ಮತ್ತು ಜೋಳದ ಬಿತ್ತನೆ ಬೀಜಗಳ ದರವು ಶೇ 7.66 ರಿಂದ ಶೇ 33.33 ರಷ್ಟು ಹೆಚ್ಚಾಗಿರುತ್ತದೆ. ದರ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆಲವು ತಳಿಗಳ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾ ಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ದರಗಳಿಗೆ ಹೋಲಿಸಿದರೆ ಶೇ 8ರಷ್ಟು ಇಳಿಕೆಯಾಗಿದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ  ಇದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ದರಗಳಿಗೆ ಹೋಲಿಸಿದರೆ ಶೇ 48.50ರಷ್ಟು ಹೆಚ್ಚಾಗಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕಡಿಮೆ ದರವಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT