ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜುಲೈ 21ರಿಂದ ಆ.21ರವರೆಗೆ ನಡೆಯಲಿದೆ.
ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಸಭೆ ನಡೆಸಿದರು.
ಒಂದು ತಿಂಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಈ ವೇಳೆ ಬೂತ್ ಮಟ್ಟದ ಏಜೆಂಟ್ಗಳು ಸ್ಥಳದಲ್ಲಿರಬೇಕಿದ್ದು, ಎಲ್ಲಾ ಕಡೆ ಬೂತ್ ಮಟ್ಟದ ಏಜೆಂಟ್ಗಳನ್ನು ನಿಯೋಜನೆ ಮಾಡಲು ರಾಜಕೀಯ ಪಕ್ಷದ ಅಧಿಕಾರಿಗಳಿಗೆ ಸೂಚನೆ ನೀಡಿದರು.
28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಕಡಿಮೆಯಿದ್ದರೆ, ಅಲ್ಲೆಲ್ಲ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸವನ್ನು ಬಿಎಲ್ಒಗಳು ಯಾವುದೇ ಲೋಪದೋಷಗಳಿಲ್ಲದಂತೆ ಸರಿಯಾಗಿ ನಿರ್ವಹಿಸಬೇಕು. ಮತದಾರರ ಪಟ್ಟಿಯಲ್ಲಿ ಮರಣ ಹೊಂದಿರುವ ಹಾಗೂ ಬೇರೆಡೆ ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು.
ಮತದಾರರ ಪಟ್ಟಿ ಪರಿಷ್ಕರಣೆ -2024ರಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು (ನಮೂನೆ 6), ತಿದ್ದುಪಡಿಗಾಗಿ (ನಮೂನೆ 8) ಅರ್ಜಿ ಸಲ್ಲಿಸಬೇಕಿದೆ. ಎಲ್ಲಾ ಪ್ರಕ್ರಿಯೆ ಮುಗಿದ ನಂತರ ಆ.28ರಿಂದ ಸೆ.29ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ ನಡೆಯಲಿದೆ. ಮತಗಟ್ಟೆಗಳ ಸ್ಥಳಾಂತರ ಅಥವಾ ದುರಸ್ತಿಯಲ್ಲಿರುವ ಮತಗಟ್ಟೆಗಳ ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ತುಷಾರ್ ಸೂಚಿಸಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.